ಹೊನ್ನಾಳಿ: ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆಗಳ ಕೊರತೆ ಇದ್ದ ಕಾಲದಲ್ಲಿ ಸ್ಥಾಪನೆಯಾದ ಭಾರತೀಯ ವಿದ್ಯಾ ಸಂಸ್ಥೆಯು, ಕಳೆದ 40 ವರ್ಷಗಳಿಂದ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ. ಎಚ್.ಪಿ. ರಾಜ್ಕುಮಾರ್ ಹೇಳಿದರು.
ಪಟ್ಟಣದ ಭಾರತೀಯ ವಿದ್ಯಾ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಗುಣಮಟ್ಟದ ಬೋಧನೆಯ ಜೊತೆಗೆ ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ಈ ಸಂಸ್ಥೆ ಕೊಡುಗೆಯಾಗಿ ನೀಡಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.
ಸಂಸ್ಥೆಯ ಅಧ್ಯಕ್ಷ ಅನಂತ್ ಕುಮಾರ್ ಎ. ಮಾತನಾಡಿ, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಪ್ರತಿವರ್ಷ ಹೊಸ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಸ್ತುತ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಂಸ್ಥೆಯು ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಹಾಗೂ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಬೋಧನೆ ಮಾಡುತ್ತಿದೆ,” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎಚ್. ಲಿಂಗಯ್ಯ, ಖಜಾಂಚಿ ಕೆ. ಸೋಮಶೇಖರಪ್ಪ, ನಿರ್ದೇಶಕರಾದ ಅರುಣ್ ಕುಮಾರ್ ಎಚ್.ಎಂ., ಹಾಲೇಶಪ್ಪ ಕುಂಕೋದ್, ಹಾಗೂ ಸಲಹಾ ಸಮಿತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
