ದಾವಣಗೆರೆ: ವಿವಿಧ ಕ್ಷೇತ್ರಗಳ ವೃತ್ತಿಪರರೊಂದಿಗೆ ಮುಖಾಮುಖಿ ಸಭೆಯನ್ನು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ನಡೆಸಿದರು.
ಮಿಲ್ಲತ್ ಶಾಲೆಯ ಆಡಿಟೋರಿಯಂನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜದ ಅಭಿವೃದ್ಧಿಗಾಗಿ ಜ್ಞಾನ ಹಂಚಿಕೆ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಬೆಳೆಸುವ
ಸಲುವಾಗಿ ಒನ್ ಟು ಒನ್ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ವೈದ್ಯರು, ಎಂಜಿನಿಯರ್ಗಳು, ಶಿಕ್ಷಕರು, ಉದ್ಯಮಿಗಳು, ಮಹಿಳಾ ಉದ್ಯಮಿಗಳು ಸೇರಿದಂತೆ ವೈವಿಧ ವೃತ್ತಿಯಲ್ಲಿ ತೊಡಗಿರುವ
ವೃತ್ತಿಪರರೊಂದಿಗೆ ಮುಖಾಮುಖಿ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಸೈಯದ್ ಖಾಲಿದ್ ಅಹ್ಮದ್ ಅವರು, ಸಮಾಜದಲ್ಲಿ ವಿದ್ಯಾವಂತರು ಮನಸ್ಸು ಮಾಡಿದರೆ ಎಂಥ ಸಮಸ್ಯೆಗಳಿದ್ದರೂ ಪರಿಹಾರ ಕಂಡುಕೊಳ್ಳಬಹುದು. ಮುಖಾಮುಖಿ
ಸಭೆ ನಡೆಸುವುದರಿಂದ ಸಮಸ್ಯೆಗಳ ಅರಿವಾಗುತ್ತದೆ. ಈಗ ಆಗಿರುವ ಕೆಲಸಗಳು ಹಾಗೂ ಮುಂದೆ ಆಗಬೇಕಾದ ಕೆಲಸಗಳ ಕುರಿತಂತೆ ನಮಗೆ ತಿಳಿಯುತ್ತದೆ. ಎಲ್ಲರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೆ
ಅವಕಾಶ ಸಿಕ್ಕರೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆಂದು ಭರವಸೆ ನೀಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ. ಅಲ್ಪಸಂಖ್ಯಾತರು ಸೇರಿದಂತೆ ಅಹಿಂದ ವರ್ಗದವರೇ ಹೆಚ್ಚಿದ್ದಾರೆ. ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅದೇ ರೀತಿಯಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆಗಳು ಬರಬೇಕಿದೆ. ಈ ನಿಟ್ಟಿನಲ್ಲಿ ನೀವೆಲ್ಲರೂ ನೀಡಿರುವ ಸಲಹೆ, ಯೋಜನೆಗಳು, ಆಗಬೇಕಿರುವ ಕೆಲಸಗಳು, ಮುಂದೆ ದೊಡ್ಡ ದೊಡ್ಡ ಕಾರ್ಯಕ್ರಮಗಳಾಗಬೇಕೆಂಬ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ ಎಂದು ಹೇಳಿದರು.
ವೈದ್ಯರು, ಎಂಜಿನಿಯರ್, ಶಿಕ್ಷಕರು, ಉದ್ಯಮಿಗಳು ಸೇರಿದಂತೆ ವೃತ್ತಿಪರರು ಸಮಾಜದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸಮಾಜ ಅಭಿವೃದ್ಧಿಯಾಗಬೇಕಾದರೆ ಎಲ್ಲರ ಸಹಕಾರ, ಸಹಭಾಗಿತ್ವ ಅತ್ಯಗತ್ಯ. ಪ್ರಾಣ ಉಳಿಸುವ ಕೆಲಸ ವೈದ್ಯರು ಮಾಡುತ್ತಾರೆ. ರೋಗಿಗಳು, ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಎಂಜಿನಿಯರ್ ಗಳು ಕಟ್ಟಡಗಳು ಸೇರಿದಂತೆ ದೊಡ್ಡ ದೊಡ್ಡ ಯೋಜನೆಗಳು ಸಾಕಾರಗೊಳ್ಳಬೇಕಾದರೆ ಶ್ರಮ ಬೇಕೇ ಬೇಕು. ಮುಂದಿನ ಭವಿಷ್ಯದ ಪ್ರಜೆಗಳ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಉದ್ಯಮಿಗಳು ಹೆಚ್ಚಾಗಿ ಉದ್ಯಮಗಳನ್ನು ತಂದು ಯಶಸ್ವಿಯಾದರೆ ಉದ್ಯೋಗವೂ ಸಿಗುತ್ತದೆ. ಎಲ್ಲಾ ವೃತ್ತಿಪರರೂ ತಮ್ಮದೇ ಆದ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ಮುಂದೆಯೂ ನೀಡಬೇಕಿದೆ. ಈ ನಿಟ್ಟಿನಲ್ಲಿ ನಡೆದ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆದದ್ದು ಸಂತಸ ತಂದಿದೆ ಎಂದು ತಿಳಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಹ ಒನ್ ಟು ಒನ್ ಸಭೆ ನಡೆಸುತ್ತಾರೆ. ಜನರು ಎದುರಿಸುತ್ತಿರುವ ಸಂಕಷ್ಟ, ಆಗಬೇಕಾಗಿರುವ ಬದಲಾವಣೆ, ಅಭಿವೃದ್ಧಿ ಸೇರಿದಂತೆ ಹತ್ತು ಹಲವು ವಿಚಾರಗಳ ಕುರಿತಂತೆ ಚರ್ಚಿಸುತ್ತಾರೆ. ಅದೇ ರೀತಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ನಡೆಸಲಾಗುತ್ತಿದೆ. ನಿಮ್ಮ ಸಹಕಾರ ಅತ್ಯಗತ್ಯ ಎಂದು ಮನವಿ ಮಾಡಿದರು.
ಸಭೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೈದ್ಯರು, ಎಂಜಿನಿಯರ್ ಗಳು, ಶಿಕ್ಷಕರು ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಪ್ರಮುಖರು ಪಾಲ್ಗೊಂಡಿದ್ದರು.
