ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ವಿಳಂಬವಾಗಿದ್ದು ನಿರೀಕ್ಷೆಯಂತೆ ವಾಡಿಕೆ ಪ್ರಮಾಣದ
ಮಳೆ ಬಾರದಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ಆಯ್ದ ತಾಲೂಕುಗಳ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ
ಹೋಗಿರುವ ಕಾರಣ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಅಡಚಣೆ ಉಂಟಾಗಬಹುದಾಗಿದ್ದು, ಸಮಸ್ಯೆಯ ಶೀಘ್ರ ಇತ್ಯರ್ಥಕ್ಕಾಗಿ
ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌ ಅವರು
ತಿಳಿಸಿದರು.
ಅವರು ಇಂದು ತಮ್ಮ ಕಚೇರಿಯ ಎಸ್.ಎಸ್.‌ಮಲ್ಲಿಕಾರ್ಜುನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿಯ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕುಡಿಯುವ ನೀರಿನ ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಸರ್ಕಾರ ಬಿಡುಗಡೆಗೊಳಿಸಿರುವ ಒಂದು ಕೋಟಿ
ರೂಪಾಯಿಗಳನ್ನು ಎಲ್ಲಾ ತಾಲೂಕುಗಳಿಗೆ ಹಂಚಿಕೆ ಮಾಡಲಾಗಿದೆ ಎಂದ ಅವರು, ನೀರಿನ ಸಮಸ್ಯೆ ಉಲ್ಬಣವಾಗಿರುವ ಗ್ರಾಮಗಳಲ್ಲಿ ನಿವಾಸಿಗಳಿಗೆ ನೀರನ್ನು
ಪೂರೈಸಲು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಕ್ರಿಯಾಯೋಜನೆ ರೂಪಿಸಿ ಸಲ್ಲಿಸಿದಲ್ಲಿ ತಕ್ಷಣದಲ್ಲಿ ಅನುಮೋದನೆ ನೀಡಿ, ಕಾಮಗಾರಿಯ
ಅನುಷ್ಟಾನಕ್ಕೆ ಸೂಚಿಸಲಾಗುವುದು ಎಂದವರು ನುಡಿದರು.
ಈ ತುರ್ತು ಕಾಮಗಾರಿಗಳ ಅನುಷ್ಟಾನದಲ್ಲಿ ಅಕ್ರಮ ಎಸಗುವ ಅಧಿಕಾರಿ ಸಿಬ್ಬಂಧಿಗಳ ವರ್ತನೆಯನ್ನು ಕ್ಷಮಿಸಲಾಗುವುದಿಲ್ಲ ಎಂದು ಎಚ್ಚರಿಸಿದ
ಅವರು, ಈಗಾಗಲೇ ಸಲ್ಲಿಸಲಾಗಿರುವ ಕ್ರಿಯಾಯೋಜನೆಯಲ್ಲಿ ಕಾಮಗಾರಿಗೆ ನಿಗಧಿತ ಮೊತ್ತಕ್ಕಿಂತ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಿರುವ ಮೂವರು
ಅಧಿಕಾರಿಗಳಿಗೆ ನೋಟೀಸ್‌ ಜಾರಿಗೊಳಿಸುವುದಾಗಿ ತಿಳಿಸಿದರು.
ಒಂದು ಕೋಟಿ ಅನುದಾನದಲ್ಲಿ 75-90ಲಕ್ಷ ರೂ.ಗಳನ್ನು ಸಾಮಾನ್ಯ ವರ್ಗಕ್ಕೆ, 15-17ಲಕ್ಷ ರೂ.ಗಳನ್ನು ಪರಿಶಿಷ್ಟ ಜಾತಿ ಮತ್ತು 6-7ಲಕ್ಷ
ರೂ.ಗಳನ್ನು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿರಿಸುವುದಾಗಿ ತಿಳಿಸಿದರು. 2026-27ನೇ ಸಾಲಿನಲ್ಲಿ ಕೈಗೊಳ್ಳಬಹುದಾದ ಅಂದಾಜು 25ಕೋಟಿ ರೂ.ಗಳ
ಕಾಮಗಾರಿಗಳಿಗೆ ಅನುಮೋದನೆ ನೀಡಿದರು.
ಈಗಾಗಲೇ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಬೋರ್‌ವೆಲ್‌ಗಳನ್ನು ಕೊರೆಯಿಸಲಾಗಿದ್ದು, ವಿದ್ಯುತ್‌ ಸಂಪರ್ಕ ಒದಗಿಸುವ ಕಾರ್ಯ ಬಾಕಿ
ಉಳಿಸಿಕೊಂಡಿದ್ದಲ್ಲಿ ಮೊದಲ ಆದ್ಯತೆಯಾಗಿ ಕ್ರಮ ಕೈಗೊಂಡು ವಿದ್ಯುತ್‌ ಸಂಪರ್ಕ ಕಲ್ಪಿಸಿ ಸಾರ್ವಜನಿಕರಿಗೆ ನೀರನ್ನು ಒದಗಿಸಬೇಕು. ಇಂತಹ ಗ್ರಾಮಗಳಲ್ಲಿ
ಖಾಸಗಿಯವರ ಕೊಳವೆಬಾವಿಗಳಿಗೆ ಒಡಂಬಡಿಕೆ ಮಾಡಿಕೊಂಡಿದ್ದಲ್ಲಿ ಅಂತಹ ಒಡಂಬಡಿಕೆಯನ್ನು ರದ್ದುಗೊಳಿಸಿಕೊಳ್ಳುವಂತೆಯೂ ಹಾಗೂ ಸಲಹೆ ನೀಡಿದ
ಅವರು ಈಗಾಗಲೇ ಬೇರೆ ಯಾವುದೇ ಯೋಜನೆಯಲ್ಲಿ ನೀರನ್ನು ಒದಗಿಸಲು ಕ್ರಮ ಕೈಗೊಂಡಿದ್ದಲ್ಲಿ ಅಂತಹವುಗಳನ್ನು ಗುರುತಿಸಿ, ಯೋಜನೆ
ಪುನರಾವರ್ತನೆಯಾಗದಂತೆ ಅಗತ್ಯವಿರುವಲ್ಲಿ ಅನುಷ್ಟಾನಗೊಳಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಗಳನ್ನುತ್ವರಿತ ಇತ್ಯರ್ಥಗೊಳಿಸಲು ಗ್ರಾಮೀಣ ಜಲಮೂಲಗಳ ಮಾಹಿತಿಯನ್ನು
ಸಂಗ್ರಹಿಸಲು ಸೂಚಿಸಿದ ಅವರು, ಈಗಾಗಲೇ ಸರ್ಕಾರದ ವಿವಿಧ ಯೋಜನೆಗಳಲ್ಲಿ ಸೃಜಿಸಿರುವ ಆಸ್ತಿಗಳ ವಿವರಗಳನ್ನು ದಾಖಲಿಸಿಟ್ಟುಕೊಳ್ಳುವಂತೆ
ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮಗಳಲ್ಲಿನ ಸರ್ಕಾರದ ಕೊಳವೆಬಾವಿಗಳು, ಅವುಗಳಲ್ಲಿ ನೀರಿರುವ, ಇಲ್ಲದಿರುವ ಹಾಗೂ ಬೇಸಿಗೆಯಲ್ಲಿ ಮಾತ್ರ
ಇಂಗಿಹೋಗುವ ಕೊಳವೆಬಾವಿಗಳ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳುವಂತೆಯೂ ಅವರು ಸೂಚಿಸಿದರು.
ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ನೀರು ಸರಬರಾಜು ಪೈಪುಗಳು ಸೇರಿದಂತೆ ಹಲವು ಕಡೆಗಳಲ್ಲಿ ದುರಸ್ತಿಗೊಳ್ಳದೆ ನೀರು ವ್ಯರ್ಥವಾಗಿ
ಹೋಗುತ್ತಿರುವುದನ್ನು ಗಮನಿಸಿರುವುದಾಗಿ ತಿಳಿಸಿದ ಅವರು, ಅವರುಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಸೂಚಿಸಿದರು.
ನೀರನ್ನು ಒದಗಿಸುವ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗಳ
ಅನುಷ್ಠಾನದಲ್ಲಿ ಆಗಿರುವ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸುವಂತೆ ಅವರು ಸಲಹೆ ನೀಡಿದರು. ನೀರಿನ ಸಮಸ್ಯೆಗಳನ್ನು ಆಲಿಸಿ, ತಕ್ಷಣದ ಪರಿಹಾರ
ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆರಂಭಿಸಲಾಗಿರುವ ಸಹಾಯವಾಣಿ ಕೇಂದ್ರಗಳಲ್ಲಿ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಬರುವ
ದೂರವಾಣಿ ಕರೆಗಳನ್ನು ಸಕಾಲದಲ್ಲಿ ಸ್ವೀಕರಿಸಿ, ದಾಖಲಿಸಿ, ಅವುಗಳಿಗೆ ಸಕಾಲಿಕ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ನಾಗೇಂದ್ರಪ್ಪ, ಜಂಟಿ ಕೃಷಿ ನಿರ್ದೇಶಕ
ಜಿಯಾವುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *